
ಮೈಸೂರು: ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರ ಒಂದು ವರ್ಷ ಪೂರೈಸಿದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನರೇಂದ್ರ ಮೋದಿ ಸರ್ಕಾರ ಪ್ರಚಾರದಿಂದ ಬದುಕಿದೆ. ಇವರ 11 ವರ್ಷಗಳ ಆಡಳಿತಕ್ಕೆ ಝೀರೋ ಮಾರ್ಕ್ಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಅವರು ನೋಟ್ ಬ್ಯಾನ್ ಮಾಡಿದರು, ಇದರಿಂದ ಯಾರಿಗೆ ಅನುಕೂಲವಾಯಿತು ಎಂದು ಪ್ರಶ್ನಿಸಿದರು.
ಅಚ್ಚೇದಿನ್ ಆಯೇಗಾ ಎಂದು ಹೇಳಿದರು, ದೇಶಕ್ಕೆ ಅಚ್ಚೇದಿನ್ ಬಂದಿದೆಯಾ?. ಮೋದಿ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು, ಕೊಟ್ಟಿದ್ದಾರಾ?. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು, ಆದರೆ ರೈತರ ಸಮಸ್ಯೆಗಳನ್ನು 11 ವರ್ಷವಾದರೂ ಬಗೆಹರಿಸಲಿಲ್ಲ. ಇವರು ಯೋಜನೆಗಳನ್ನು ಘೋಷಿಸಿದ್ದಾರೆ ಅಷ್ಟೇ, ಯಾವುದನ್ನೂ ಜಾರಿ ಮಾಡಲಿಲ್ಲ. ಪ್ರಚಾರದ ಮೂಲಕ ಸುಳ್ಳು ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದರು. ಆದರೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡಿ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಘೋಷಣೆ ಮಾಡಿದರು ಎಂದು ಹೇಳಿದ್ದಾರೆ..