
ಬೆಂಗಳೂರು: ಥಗ್ಲೈಫ್ ಸಿನಿಮಾ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಇಂದು ನಡೆದಿದ್ದು, ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳಲು ನೀವು ಭಾಷಾ ತಜ್ಞರೇ ಎಂದು ಪ್ರಶ್ನಿಸಿರುವ ಹೈಕೋರ್ಟ್ ನಟ ಕಮಲ್ ಹಾಸನ್ ಅವರಿಗೆ ಮೌಖಿಕವಾಗಿ ಕ್ಷಮೆಯಾಚಿಸುವಂತೆ ಸೂಚಿಸಿದೆ.
ಇನ್ನು ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ಥಗ್ ಲೈಫ್ ಬಿಡುಗಡೆ ಮಾಡದಂತೆ ಹೈಕೋರ್ಟ್ನಿಂದ ಆದೇಶ ಹೊರಡಿಸಲಾಗಿದೆ. ಕನ್ನಡ ಭಾಷೆಯ ಬಗ್ಗೆ ಮಾತನಾಡಿದ್ದಕ್ಕೆ ಕ್ಷಮೆ ಕೇಳಿದ ನಂತರವೇ ಅವರ ಸಿನಿಮಾಗೆ ಭದ್ರತೆ ಕೊಡುವ ವಿಚಾರಕ್ಕಾಗಿ ಸಲ್ಲಿಕೆ ಮಾಡಿದ ಅರ್ಜಿಯನ್ನು ಪರಿಗಣಿಸಲಾಗುವುದು. ಈ ಸಮಸ್ಯೆ ಪರಿಹಾರ ಆಗುವವರೆಗೂ ಸಿನಿಮಾ ಬಿಡುಗಡೆ ಮಾಡುವಂತಿಲ್ಲ. ಮುಂದಿನ ವಿಚಾರಣೆ ಜೂ.10ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ.
ಅರ್ಜಿದಾರರ ಪರ ವಕೀಲರಾದ ಅಮೃತೇಶ್ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಿ, ಕಮಲ್ ಹಾಸನ್ ಅವರು ಕನ್ನಡಿಗರ ಆತ್ಮಾಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು. ಇಲ್ಲವಾದರೆ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.